ಬೆಂಗಳೂರು: ಬೆಂಗಳೂರಿನ ನಗರದಲ್ಲಿ ಎಟಿಎಂ ಗೆ ತುಂಬಿಸಲು ತಂದಿದ್ದ ಹಣವನ್ನು ಹಾಡಹಗಲೇ ದರೋಡೆ ತಂಡವೊಂದು ಎಗರಿಸಿದ ಘಟನೆ ವರದಿಯಾಗಿದೆ. ಬುಧವಾರ ಮಧ್ಯಾಹ್ನ ವೇಳೆ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ನಗದು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಜಯದೇವ ಡೇರಿ ಸರ್ಕಲ್ ಬಳಿ ಜನನಿಬಿಡ ಪ್ರದೇಶದಲ್ಲಿ ಈ ದರೋಡೆ ನಡೆದಿದ್ದು, ಇನ್ನೋವಾ ಕಾರಿನಲ್ಲಿ ಬಂದ 7-8 ಜನ ದರೋಡೆಕೋರರ ಗ್ಯಾಂಗ್ ಏಕಾಏಕಿ ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು 7.11 ಕೋಟಿ ರೂಪಾಯಿ ಹಣ ದರೋಡೆ ಮಾಡಿ ಪರಾರಿಯಾಗಿದೆ. ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲಿ ಘಟನೆ ನಡೆದಿದೆ.
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ನ ಬಳಿ ತಡೆದ ಗ್ಯಾಂಗ್, ನಾವು ಆರ್ಬಿಐನವರು ಎಂದು ಹೇಳಿಕೊಂಡು ಹೆದರಿಸಿದ್ದಾರೆ. ಗನ್ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್ಗೆ ಕರೆದೊಯ್ದಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ವಾಹನ ನಿಲ್ಲಿಸಿ ಅದರಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಎಟಿಎಂ ವಾಹನದಲ್ಲಿ ಓರ್ವ ಡ್ರೈವರ್,ಇಬ್ಬರು ಗನ್ ಮ್ಯಾನ್ ಹಾಗೂ ಮತ್ತೊಬ್ಬ ಹಣ ಹಾಕುವ ಸಿಬ್ಬಂದಿ ಒಟ್ಟು ನಾಲ್ಕು ಜನ ಸಿಎಂಎಸ್ ಸಿಬ್ಬಂದಿ ಇದ್ದರು. ಪ್ರಕರಣದ ತನಿಖೆ ನಡೆಯುತ್ತಿದೆ.

0 Comments