Ticker

6/recent/ticker-posts

Ad Code

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಮತಿ ನಿರಾಕರಣೆ : ನಾಳಿನ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯ ತೆರವು

 

ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಆಂಧ್ರಪ್ರದೇಶ ಹಾಗೂ ದೆಹಲಿ ನಡುವಿನ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯವನ್ನು ನಡೆಸಲು ರಾಜ್ಯ ಗೃಹ ಇಲಾಖೆ ಅನುಮತಿ ನಿರಾಕರಿಸಿದೆ. ಈಗಾಗಲೇ ಪ್ರಕಟಗೊಂಡಿದ್ದ ವಿಜಯ್ ಹಜಾರೆ ಟ್ರೋಫಿ ಶೆಡ್ಯೂಲ್ ಪ್ರಕಾರ ಡಿಸೆಂಬರ್ 24ರಂದು ಬೆಳಿಗ್ಗೆ 9 ಗಂಟೆಗೆ ಈ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಬೇಕಿತ್ತು. ಆದರೆ  ಜೂನ್ ತಿಂಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ನಡೆದ ಭೀಕರ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಾವಳಿಗಳನ್ನು ನಡೆಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಅತ್ಯಂತ ಎಚ್ಚರಿಕೆ ವಹಿಸಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಸರ್ಕಾರ ಷರತ್ತುಬದ್ಧ ಅನುಮತಿಯನ್ನು ನೀಡಿತ್ತು. ಇದರ ಬೆನ್ನಲ್ಲೇ ವಿಜಯ್ ಹಜಾರೆ ಟ್ರೋಫಿ ವೇಳಾಪಟ್ಟಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೂ ಕೆಲವು ಪಂದ್ಯಗಳನ್ನು ಆಯೋಜಿಸಲಾಗಿತ್ತು. ಆದರೆ, ಡಿಸೆಂಬರ್ 24ರಂದು ನಡೆಯಬೇಕಿದ್ದ ಆಂಧ್ರಪ್ರದೇಶ ದೆಹಲಿ ನಡುವಿನ ಪಂದ್ಯಕ್ಕೆ ಮಾತ್ರ ಸರ್ಕಾರ ಅನುಮತಿ ನೀಡಿಲ್ಲ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಕ್ರೀಡಾಂಗಣದತ್ತ ಹರಿದುಬರುವ ಸಾಧ್ಯತೆ ಇದೆ. ಜೂನ್ ತಿಂಗಳಲ್ಲಿ ನಡೆದಂತಹ ದುರ್ಘಟನೆ ಮರುಕಳಿಸಬಾರದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಪಂದ್ಯವನ್ನು ನಡೆಸದಂತೆ ಸರ್ಕಾರ ಹಾಗೂ ಬೆಂಗಳೂರು ಪೊಲೀಸರು ಕೆಎಸ್‌ಸಿಎಗೆ ಸೂಚನೆ ನೀಡಿದ್ದಾರೆ. ಪಂದ್ಯಕ್ಕೆ ಅನುಮತಿ ನೀಡುವ ಸಂಬಂಧ ಸೋಮವಾರ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಭದ್ರತೆ ಮತ್ತು ಮೂಲಸೌಕರ್ಯಗಳ ಪರಿಶೀಲನೆ ನಡೆಸಿದ್ದರು. ಪರಿಶೀಲನೆಯ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ಅಂತಿಮವಾಗಿ ಬೆಂಗಳೂರು ಪೊಲೀಸರು ಪಂದ್ಯಕ್ಕೆ ಅನುಮತಿ ನಿರಾಕರಿಸುವ ನಿರ್ಧಾರ ಕೈಗೊಂಡಿದ್ದಾರೆ.

Post a Comment

0 Comments