ಸಾಂದರ್ಭಿಕ ಚಿತ್ರ
ಪುತ್ತೂರು : ನಗರಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳಿಗೆ ನಿಯಮಿತವಾಗಿ ಆಹಾರ ನೀಡುವವರು ನಗರಸಭೆಯಿಂದ ಗುರುತಿನ ಚೀಟಿ ಪಡೆಯಬೇಕೆಂದು ನಗರಸಭೆ ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ. ಪುತ್ತೂರು ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ, ಕಾಟ ಹೆಚ್ಚಾಗುತ್ತಿದ್ದುಇದನ್ನು ನಿಯಂತ್ರಿಸಲು ಪುತ್ತೂರು ನಗರಸಭೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಮುಖ್ಯವಾಗಿ ನಗರದ ಸಾರ್ವಜನಿಕ ಸ್ಥಳದಲ್ಲಿ ಕೆಲವು ಶ್ವಾನಪ್ರಿಯರು ಬೀದಿನಾಯಿಗಳಿಗೆ ಅವೈಜ್ಞಾನಿಕವಾಗಿ ಆಹಾರ ನೀಡುತ್ತಿರುವ ಬಗ್ಗೆ ದೂರು ಬಂದಿದೆ.
ಅನಧಿಕೃತವಾಗಿ ರಸ್ತೆಯ ಬದಿ, ಚರಂಡಿಗಳ ಮೇಲೆ, ಶಾಲಾ ವಠಾರದಲ್ಲಿ, ಜನ ನಿಬಿಡ ಪ್ರದೇಶಗಳಲ್ಲಿ, ಬಸ್ ನಿಲ್ದಾಣ ಇನ್ನಿತರ ಸ್ಥಳಗಳಲ್ಲಿ ಸಾರ್ವಜನಿಕರು ಬೀದಿ ನಾಯಿಗಳಿಗೆ ಆಹಾರ ಹಾಕುವುದನ್ನು ನಿಷೇಧಿಸಲಾಗಿದೆ. ನಾಯಿಗಳ ಸಂತಾನಹರಣ ಚಿಕಿತ್ಸೆ (ಎಬಿಸಿ) ನಿಯಮಗಳು 2023ರ ಸೆಕ್ಷನ್ 20(1)(ಐ)ಪ್ರಕಾರ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವ ಜಾಗಗಳನ್ನು ಗುರುತಿಸಬೇಕಾಗಿದೆ. ಆದುದರಿಂದ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳಿಗೆ ನಿಯಮಿತವಾಗಿ ಆಹಾರ ನೀಡುವವರಾಗಿದ್ದರೆ ಡಿ.1ರ ಅಪರಾಹ್ನ 12 ಗಂಟೆಯೊಳಗೆ ನಗರಸಭಾ ಕಚೇರಿಗೆ ಬಂದು ಬೀದಿನಾಯಿಗಳಿಗೆ ಆಹಾರ ನೀಡುತ್ತಿರುವ ಸ್ಥಳಗಳ ಬಗ್ಗೆ ಮಾಹಿತಿ ನೀಡಿ ನಗರಸಭೆಯಿಂದ ಗುರುತಿನ ಚೀಟಿ ಪಡೆದುಕೊಳ್ಳತಕ್ಕದ್ದು.ತಪ್ಪಿದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತರು ತಿಳಿಸಿದ್ದಾರೆ.

0 Comments