ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿದ ಘಟನೆ ಬೀದರ್‌ನ  ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿ  ಮೃತಪಟ್ಟಿರುವುದಾಗಿ ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಚಿಮಕೋಡ್ ಗ್ರಾಮದ  ಮೀನಾಕ್ಷಿ(26) ಮೃತ ಬಾಣಂತಿ. ಮಂಗಳವಾರ (ಜ.20) ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ  ಶೌಚಾಲಯಕ್ಕೆ ತೆರಳುವಾಗ ಕುಸಿದು ಬಿದ್ದಿದ್ದು, ಈ ವೇಳೆ ವೈದ್ಯರು ಇಂಜೆಕ್ಷನ್ ನೀಡಿದ್ದರು. ಬಳಿಕ ಬಾಣಂತಿ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದ್ದು, ಬ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದರು. ಬ್ರಿಮ್ಸ್ ವೈದ್ಯರು ಪರೀಕ್ಷಿಸಿದಾಗ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಮೃತಳ ಕುಟುಂಬಸ್ಥರು ಖಾಸಗಿ ಆಸ್ಪತ್ರೆಯ ಎದುರು ಶವವನ್ನು ಇರಿಸಿ  ಪ್ರತಿಭಟನೆ ಮಾಡುತ್ತಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವಿಗೆ ಕಾರಣವೆಂದು ಆರೋಪ ಮಾಡಿದ್ದು, ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಒತ್ತಾಯ ಮಾಡಿದ್ದಾರೆ.