ಹಾಸನ : ಪ್ರಿವೆಡ್ಡಿಂಗ್ ಶೂಟ್ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದರು.
ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿಯಾಗಿತ್ತು. ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಇಂದು ಬೆಳಿಗ್ಗೆ ಮನು ಅವರು ಪ್ರೀವೆಡ್ಡಿಂಗ್ ಶೂಟಿಂಗ್ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು. ಕಾರು ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ತಲುಪಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮನು ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

0 Comments