ನೆಲ್ಯಾಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಬುಧವಾರ ಬೆಳಗ್ಗೆ ಎರಡು ಬೈಕ್ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬ ಬೈಕ್ ಸವಾರ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಎರಿಕ್ಕಲಂ ನಿವಾಸಿ ರಿಜೇಶ್ ವಿ. (33) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಇನ್ನೊಬ್ಬ ಬೈಕ್ ಸವಾರ ಕೊಕ್ಕಡ ಗ್ರಾಮದ ಸಂಗಮ್ ಪಿಕಪ್ ಎಂದು ತಿಳಿದುಬಂದಿದೆ.
ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಿಜೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ನೆಲ್ಯಾಡಿ ಹೊರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆ, ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗೆ ಕಡಿವಾಣ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಇಂತಹ ದುರಂತಗಳನ್ನು ತಪ್ಪಿಸಬಹುದಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
.jpeg)
0 Comments