ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಸಮೀಪ ಸೋಮವಾರ ಮುಂಜಾನೆ ನಡೆದ ಸಿನಿಮೀಯ ದರೋಡೆ ಪ್ರಕರಣದಲ್ಲಿ ಚಿನ್ನದ ವ್ಯಾಪಾರಿಯೊಬ್ಬರ ಕುಟುಂಬವನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು 180 ಗ್ರಾಂ ಚಿನ್ನಾಭರಣ ಹಾಗೂ ಕಾರನ್ನು ದೋಚಿ ಪರಾರಿಯಾಗಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಮೂಲದ ಹಾಗೂ ಕೇರಳದ ಪಯ್ಯನ್ನೂರಿನಲ್ಲಿ ನೆಲೆಸಿರುವ ಚಿನ್ನಾಭರಣ ವ್ಯಾಪಾರಿ ವಿಕಾಸ್ ಸುಬ್ಬರಾವ್ ಧನವಾಡೆ (44) ದರೋಡೆಗೆ ಒಳಗಾದವರು. ಪತ್ನಿ ರೂಪಾಲಿ (38) ಹಾಗೂ ಪುತ್ರ ವಿಫುಲ್ (14) ಅವರೊಂದಿಗೆ ಮಹಾರಾಷ್ಟ್ರದಿಂದ ಕೇರಳಕ್ಕೆ ಸ್ವಿಫ್ಟ್ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ.
ಸೋಮವಾರ ಮುಂಜಾನೆ ಸುಮಾರು 2.15ರ ವೇಳೆಗೆ ಬೈಕಂಪಾಡಿಯ ದ್ವಾರಾ ಹೋಟೆಲ್ ಸಮೀಪದ ಜಂಕ್ಷನ್ನಲ್ಲಿ ಮೂರು ಕಾರುಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿದ್ದಾರೆ. ಬಳಿಕ ಕಾರಿನಿಂದ ಇಳಿದ ಏಳು ಮಂದಿ ಮುಸುಕುಧಾರಿಗಳು ಮಾರಕಾಯುಧಗಳೊಂದಿಗೆ ವಿಕಾಸ್ ಅವರ ಮೇಲೆ ಹಲ್ಲೆ ನಡೆಸಿ ಕಾರಿನಿಂದ ಹೊರಕ್ಕೆ ತಳ್ಳಿದ್ದಾರೆ. ನಂತರ ಕಾರಿನಲ್ಲಿದ್ದ ರೂಪಾಲಿ ಹಾಗೂ ಪುತ್ರನನ್ನು ಅದೇ ವಾಹನದಲ್ಲಿ ಕರೆದೊಯ್ದ ದುಷ್ಕರ್ಮಿಗಳು, ಚಲಿಸುತ್ತಿದ್ದ ಕಾರಿನಲ್ಲೇ ಬ್ಯಾಗ್ ಕಸಿದು ಅದರಲ್ಲಿದ್ದ 180 ಗ್ರಾಂ ಚಿನ್ನಾಭರಣ ಮತ್ತು ಮೊಬೈಲ್ ಫೋನ್ಗಳನ್ನು ದೋಚಿದ್ದಾರೆ. ಬಳಿಕ ಪಣಂಬೂರು ಬೀಚ್ ರಸ್ತೆಯ ನಿರ್ಜನ ಪ್ರದೇಶದಲ್ಲಿ ತಾಯಿ-ಮಗನನ್ನು ಇಳಿಸಿ, ಅವರ ಕಾರಿನೊಂದಿಗೆ ಪರಾರಿಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪಣಂಬೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಸಂತ್ರಸ್ತರಿಗೆ ನೆರವು ನೀಡಿದರು. ಹೆದ್ದಾರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಮಾತನಾಡಿ, ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳಿಂದ ಕೆಲವು ಮಹತ್ವದ ಸುಳಿವುಗಳು ಲಭ್ಯವಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ವ್ಯಾಪಾರಿ ವಿಕಾಸ್ ಧನವಾಡೆ ಅವರು ಮದುವೆ ಸಮಾರಂಭದಲ್ಲಿ ಭಾಗವಹಿಸಿ ಚಿನ್ನಾಭರಣಗಳೊಂದಿಗೆ ವಾಪಸಾಗುತ್ತಿರುವ ಮಾಹಿತಿ ಅತ್ಯಂತ ಸೀಮಿತ ವಲಯಕ್ಕೆ ಮಾತ್ರ ತಿಳಿದಿದ್ದ ಕಾರಣ, ಪ್ರಕರಣದ ಹಿಂದೆ ಪರಿಚಿತರು ಅಥವಾ ಆಪ್ತರ ಕೈವಾಡ ಇರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

0 Comments