ರಾಂಚಿ : ಜಾರ್ಖಂಡ್ ರಾಜಧಾನಿ ರಾಂಚಿಯ ನಿವಾರಣಪುರ ಪ್ರದೇಶದಲ್ಲಿರುವ ಆರ್ಎಸ್ಎಸ್ ಕಚೇರಿ ಮೇಲೆ ಮಂಗಳವಾರ ತಡರಾತ್ರಿ ಪೆಟ್ರೋಲ್ ಬಾಂಬ್ ಎಸೆಯಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಬಿಜೆಪಿ ಹಿರಿಯ ನಾಯಕರು ಗಂಭೀರ ಆತಂಕ ವ್ಯಕ್ತಪಡಿಸಿದ್ದು, ಇದು ದೊಡ್ಡ ಸಂಚಿನ ಭಾಗವಾಗಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಹಾಗೂ ಜಾರ್ಖಂಡ್ನ ಬಿಜೆಪಿ ಹಿರಿಯ ನಾಯಕ ಸಂಜಯ್ ಸೇಠ್ ಅವರ ಪ್ರಕಾರ, ಮಂಗಳವಾರ ತಡರಾತ್ರಿ ಇಬ್ಬರು ಯುವಕರು ಸಂಘದ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಈ ಘಟನೆ ದೊಡ್ಡ ಸಂಚು ಸೂಚಿಸುತ್ತಿದ್ದು, ಸಂಘದ ಕಚೇರಿ ಸಮೀಪ ಶಾಶ್ವತ ಪೊಲೀಸ್ ಪಿಕೆಟ್ ಸ್ಥಾಪಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ನಗರ ಉಪ ಪೊಲೀಸ್ ಅಧೀಕ್ಷಕ ಕೆ.ವಿ. ರಮಣ್, ಸ್ಥಳದಿಂದ ಎರಡು ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸೈಬರ್ ಡಿಎಸ್ಪಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ತನಿಖೆಗೆ ನಿಯೋಜಿಸಲಾಗಿದ್ದು, ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದರು.
ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯ ವೇಳೆ ಕೆಲ ಶಂಕಿತರ ಕುರಿತು ಮಾಹಿತಿ ಲಭ್ಯವಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ದಾಳಿಯ ಹಿಂದಿನ ಉದ್ದೇಶ ಹಾಗೂ ಆರೋಪಿಗಳ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.
.jpeg)
0 Comments