ವಿಟ್ಲ : ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ನಿಂತಿದ್ದ ಟಿಪ್ಪರ್ ಲಾರಿ ಆಕಸ್ಮಿಕವಾಗಿ ಮುಂದಕ್ಕೆ ಚಲಿಸಿದ ಕಾರಣ ಚಕ್ರದೆಡೆಗೆ ಸಿಲುಕಿ ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಧರ್ಮಸ್ಥಳ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಟಿಪ್ಪರ್ ಲಾರಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದನ್ನು ಸರಿಪಡಿಸುವ ಸಲುವಾಗಿ ಚಾಲಕ ಮಹೇಶ್ ಲಾರಿಯ ಕೆಳಗೆ ಇಳಿದು ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುಂದಕ್ಕೆ ಚಲಿಸಿದ್ದು, ಮಹೇಶ್ ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಊರವರ ಸಹಕಾರದಲ್ಲಿ ಲಾರಿಯ ಅಡಿಯಿಂದ ಮೃತದೇಹವನ್ನು ಹೊರತೆಗೆಯಲಾಯಿತು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಟ್ಲ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 Comments