ಕುಂಬಳೆ:ಶಿಕ್ಷಣವೇ ಸಮಾಜದ ಪ್ರಗತಿಯ ಮೂಲಾಧಾರ ಎಂಬ ಧ್ಯೇಯದೊಂದಿಗೆ ಚೆರಂಜೀವಿ ಕುಂಬಳೆ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.
ಕಾರ್ಯಕ್ರಮವನ್ನು ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿ. ಪಿ. ಅಬ್ದುಲ್ ಖಾದರ್ ಉದ್ಘಾಟಿಸಿ ಮಾತನಾಡಿ, ಒಂದು ಪುಸ್ತಕ ಮಗುವಿನ ಕೈಗೆ ಸೇರುವುದು ಎಂದರೆ ಅದರ ಕನಸುಗಳಿಗೆ ಹೊಸ ರೆಕ್ಕೆ ಮೂಡಿದಂತೆಯೇ. ಶಿಕ್ಷಣವು ವ್ಯಕ್ತಿಯ ಬದುಕನ್ನು ಮಾತ್ರವಲ್ಲ, ಇಡೀ ಸಮಾಜದ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದೆ. ಪ್ರತಿಭೆಯನ್ನು ಗುರುತಿಸಿ ಗೌರವಿಸುವುದು ಮತ್ತು ಅಗತ್ಯವಿರುವ ವಿದ್ಯಾರ್ಥಿಗಳಿಗೆ ನೆರವಾಗುವುದು ಅತ್ಯಂತ ಪುಣ್ಯದ ಕಾರ್ಯವೆಂದರು.
"ಇಂದಿನ ಮಕ್ಕಳು ನಾಳಿನ ಸಮಾಜದ ಶಿಲ್ಪಿಗಳು. ಅವರಿಗೆ ನೀಡುವ ಪ್ರೋತ್ಸಾಹ, ಪ್ರೇರಣೆ ಮತ್ತು ಅವಕಾಶಗಳು ಭವಿಷ್ಯದ ಸುಂದರ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತವೆ. ಈ ನಿಟ್ಟಿನಲ್ಲಿ ಚೆರಂಜೀವಿ ಸಂಸ್ಥೆ ನಡೆಸುತ್ತಿರುವ ಸೇವೆ ನಿಜಕ್ಕೂ ಮಾದರಿಯಾಗಿದೆ" ಎಂದು ಪ್ರಶಂಸಿಸಿದರು.
ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ 109 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಇತರ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಒಂಭತ್ತು ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಶಿಕ್ಷಣ ಸೇವೆ, ಪ್ರತಿಭಾ ಪ್ರೋತ್ಸಾಹ ಮತ್ತು ಸಾಮಾಜಿಕ ಬದ್ಧತೆಯ ಸುಂದರ ಸಮನ್ವಯವಾಗಿ ಮೂಡಿಬಂದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ಮೂಡಿಸಿತು.
ಸಮಾರಂಭದಲ್ಲಿ ಕ್ಲಬ್ ಅಧ್ಯಕ್ಷ ಬಾಲಕೃಷ್ಣ ಗಟ್ಟಿ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯ ಪೃಥ್ವಿರಾಜ್ ಶೆಟ್ಟಿ, ಗ್ರಾ. ಪಂ. ಸದಸ್ಯರಾದ ರಮೇಶ ಭಟ್, ಸ್ನೇಹಾ, ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಎಂ. ನಾ. ಚಂಬಲ್ತಿಮಾರ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯದರ್ಶಿ ಕೃಷ್ಣ ಗಟ್ಟಿ ಸ್ವಾಗತಿಸಿ, ಪ್ರಜೀಶ್ ಪೆರುವಾಡ್ ವಂದಿಸಿದರು. ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಅವರು ಕಾರ್ಯಕ್ರಮ ನಿರೂಪಿಸಿದರು. ಕ್ಲಬ್ ಸದಸ್ಯರು, ಮಹಿಳಾ ವಿಭಾಗ ಪದಾಧಿಕಾರಿಗಳು ಸಂಪೂರ್ಣ ಸಹಕರಿಸಿದರು.

0 Comments