ಬೆಂಗಳೂರು : ಯುವಕನೊಬ್ಬ ತನ್ನ ತಾಯಿ, ಅಜ್ಜಿ ಹಾಗೂ ಮಾವನನ್ನು ಕೊಲೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಭೀಭತ್ಸ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ. ಮೃತರನ್ನು ಮಂಗಳಮ್ಮ, ನಂಜಮ್ಮ ಹಾಗೂ ಸತೀಶ್ ಎಂದು ಗುರುತಿಸಲಾಗಿದೆ. ಕೊಲೆ ಕೃತ್ಯ ಎಸಗಿದ ಆರೋಪಿ ಪ್ರಶಾಂತ್ ಕೂಡ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಾಹಿತಿ ತಿಳಿದು ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮಂಗಳಮ್ಮ ಗಾರ್ಮೆಂಟ್ಸ್ ಕಾರ್ಮಿಕೆಯಾಗಿದ್ದು, ನಂಜಮ್ಮ ಪೌರಕಾರ್ಮಿಕೆಯಾಗಿದ್ದರು. ಸತೀಶ್ ಪ್ಲಂಬರ್ ಕೆಲಸ ಮಾಡುತ್ತಿದ್ದರು. ಆರೋಪಿ ಪ್ರಶಾಂತ್ ಈ ಹಿಂದೆ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರೂ, ಕಳೆದ ಒಂದು ವರ್ಷದಿಂದ ಉದ್ಯೋಗಕ್ಕೆ ಹೋಗುತ್ತಿರಲಿಲ್ಲ ಎನ್ನಲಾಗಿದೆ.
ಕುಟುಂಬ ಕಳೆದ ಏಳು-ಎಂಟು ವರ್ಷಗಳಿಂದ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಶನಿವಾರ ಬೆಳಗ್ಗೆ ಕುಟುಂಬದ ಮುಖ್ಯಸ್ಥ ಕೆಲಸಕ್ಕೆ ತೆರಳಿದ ಬಳಿಕ ಮನೆಯಲ್ಲಿ ಇದ್ದ ಮೂವರ ಮೇಲೆ ಪ್ರಶಾಂತ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕೃತ್ಯ ಎಸಗಿದ ಬಳಿಕ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಮನೆ ಮಾಲೀಕರು ಹಾಗೂ ಸ್ಥಳೀಯರು ಆತನನ್ನು ಹಿಡಿದು ಮನೆಯೊಂದರ ಕೊಠಡಿಯಲ್ಲಿ ಕೂಡಿ ಹಾಕಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
.png)
0 Comments