ಕೋಲ್ಕತ್ತಾ : ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕಿಯ ಶವ ಗೋಣಿಚೀಲದಲ್ಲಿ ಪತ್ತೆಯಾದ ಪ್ರಕರಣ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣದ ಶಂಕಿತ ಆರೋಪಿಯನ್ನು ಸ್ಥಳೀಯರು ಥಳಿಸಿ ಕೊಂದ ಘಟನೆ ನಡೆದಿದೆ.
ಸ್ನೇಹಿತನಿಗೆ ಉಡುಗೊರೆ ಖರೀದಿಸಲು ತೆರಳಿದ್ದ ಬಾಲಕಿ ಶನಿವಾರ ನಾಪತ್ತೆಯಾಗಿದ್ದಳು. ಆಕೆಯನ್ನು ನಾಲ್ವರು ಅಪರಿಚಿತರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಬಳಿಕ ಬಾಲಕಿಯ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾಯಿತು.
ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿ, ಟೈರ್ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಕೆಲವು ಕಡೆ ಪೊಲೀಸ್ ವಾಹನಗಳ ಮೇಲೂ ದಾಳಿ ನಡೆದಿರುವುದು ವರದಿಯಾಗಿದೆ. ಇದೇ ವೇಳೆ ಪ್ರಕರಣದ ಶಂಕಿತ ಆರೋಪಿಯನ್ನು ಹಿಡಿದ ಸ್ಥಳೀಯರು ಥಳಿಸಿದ್ದು, ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ.

0 Comments