ಮಂಗಳೂರು : ಮೊಬೈಲ್ನಲ್ಲಿ ಮಾತನಾಡಿದ ವಿಚಾರವಾಗಿ ಆರಂಭವಾದ ಸಹೋದರರ ನಡುವಿನ ಜಗಳ ಕೊನೆಗೆ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು ಮಠದ ಸಮೀಪ ರವಿವಾರ ತಡರಾತ್ರಿ ನಡೆದಿದೆ.
ಕೊಲೆಯಾದ ಯುವಕನನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ಮೂಲದ ಹಾಗೂ ಪ್ರಸ್ತುತ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೃತನ ಸಹೋದರ ಸೋಮನಾಥ್ (21)ನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಶಿವಲೀಲಾ ಅವರ ಪುತ್ರರಾದ ಸೋಮನಾಥ್ ಮತ್ತು ಮಲ್ಲಿಕಾರ್ಜುನ ಕುಟುಂಬದೊಂದಿಗೆ ಕಳೆದ ಐದು ವರ್ಷಗಳಿಂದ ಚೊಕ್ಕಬೆಟ್ಟುವಿನಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಪೊಲೀಸರ ಮಾಹಿತಿ ಪ್ರಕಾರ, ಜುಲೈ 19ರ ರಾತ್ರಿ ಮಲ್ಲಿಕಾರ್ಜುನ ಮೊಬೈಲ್ನಲ್ಲಿ ಯುವತಿಯೊಬ್ಬಳೊಂದಿಗೆ ಮಾತನಾಡುತ್ತಿದ್ದ ವೇಳೆ ಸೋಮನಾಥ್ ಅದನ್ನು ವಿರೋಧಿಸಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ತಮ್ಮ ಅಣ್ಣನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ.
ಈ ಘಟನೆಯಿಂದ ಆಕ್ರೋಶಗೊಂಡ ಸೋಮನಾಥ್, ಮಲ್ಲಿಕಾರ್ಜುನ ನಿದ್ದೆಗೆ ಜಾರಿದ ಬಳಿಕ ಮನೆಯಲ್ಲಿದ್ದ ಕೊಡಲಿಯನ್ನು ತೆಗೆದುಕೊಂಡು ತಲೆ ಮತ್ತು ಮುಖಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಲ್ಲಿಕಾರ್ಜುನ ಸ್ಥಳದಲ್ಲೇ ಮೃತಪಟ್ಟಿದ್ದು, ಆರೋಪಿ ಬಳಿಕ ಪರಾರಿಯಾಗಿದ್ದ.
ಪ್ರಕರಣ ದಾಖಲಿಸಿಕೊಂಡ ಸುರತ್ಕಲ್ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿ, ಕೃಷ್ಣಾಪುರ ಮಠ ರಸ್ತೆಯ ಸಮೀಪದ ಪೊದೆಯಲ್ಲಿ ಅಡಗಿಕೊಂಡಿದ್ದ ಸೋಮನಾಥನನ್ನು ಬಂಧಿಸಿದರು. ವಿಚಾರಣೆ ವೇಳೆ ಆರೋಪಿಯು ಕೃತ್ಯವನ್ನು ಒಪ್ಪಿಕೊಂಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

0 Comments