ಪಾಲಕ್ಕಾಡು : ಜಿಲ್ಲೆಯ ಕೊಳಿಂಜಾಂಪಾರದಲ್ಲಿ ಬೆಚ್ಚಿಬೀಳಿಸುವ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ವೃದ್ಧೆಯೊಬ್ಬರನ್ನು ಬೆಂಕಿ ಹಚ್ಚಿ ಕೊಲೆ ಮಾಡಿ ಬಳಿಕ ಮೃತದೇಹವನ್ನು ಹೂತುಹಾಕಿದ ಘಟನೆ ನಡೆದಿದೆ. ಆಟ್ಟಯಾಂಪತಿ ನಿವಾಸಿ ಸರಸಮ್ಮಾಳ್ (66) ಕೊಲೆಯಾದವರು. ಅವರ ಚಿನ್ನಾಭರಣ ಕಳವು ಮಾಡುವ ಉದ್ದೇಶದಿಂದ 19 ವರ್ಷದ ಯುವಕ ಹಾಗೂ ಆತನ 17 ವರ್ಷದ ಸ್ನೇಹಿತ ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಕಳೆದ ತಿಂಗಳ 10ರಂದು ಸರಸಮ್ಮಾಳ್ ನಾಪತ್ತೆಯಾಗಿದ್ದರು. ಈ ಸಂಬಂಧ ದಾಖಲಾದ ನಾಪತ್ತೆ ಪ್ರಕರಣದ ತನಿಖೆ ನಡೆಸಿದ ಕೊಳಿಂಜಾಂಪಾರ ಪೊಲೀಸರು, ಇದು ಕೊಲೆ ಪ್ರಕರಣ ಎಂದು ಪತ್ತೆಹಚ್ಚಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಆರೋಪಿ, ಸರಸಮ್ಮಾಳ್ ಅವರನ್ನು ಮನೆಗೆ ಕರೆದುಕೊಂಡು ಹೋಗಿ ತಲೆಗೆ ಹೊಡೆದು ಕೊಲೆ ಮಾಡಿದ ಬಳಿಕ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹಕ್ಕೆ ಬೆಂಕಿ ಹಚ್ಚಿ ಹೂತುಹಾಕಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳ್ಳತನ ಹಾಗೂ ಕೊಲೆ ಕೃತ್ಯಕ್ಕೆ ಸಹಾಯ ಮಾಡಿದ ಆರೋಪದ ಮೇಲೆ 17 ವರ್ಷದ ಅಪ್ರಾಪ್ತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

0 Comments