ಕೊಚ್ಚಿ: ಕೊಚ್ಚಿ–ಧನುಷ್ಕೋಡಿ ರಾಷ್ಟ್ರೀಯ ಹೆದ್ದಾರಿಯ ಕಡಮಟ್ಟಂ ಪೆರುವಮ್ಮೂಝಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ.
ತೊಡುಪುಳ ಸಮೀಪದ ಮಡಕ್ಕತ್ತಾನಂ ವಾಝಕ್ಕುಳಂ ನಿವಾಸಿ ಎಸ್. ರಾಹುಲ್ (20) ಮೃತ ವಿದ್ಯಾರ್ಥಿ. ಅವರು ವರಿಕ್ಕೋಲಿ ಮುತ್ತೂಟ್ ಎಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.
ಸೋಮವಾರ ಬೆಳಿಗ್ಗೆ ಸುಮಾರು 7.30ರ ವೇಳೆಗೆ ಸ್ನೇಹಿತ ಹಾಗೂ ಸಹಪಾಠಿ ಜೂಲಿಯನ್ ಜೋಸೆಫ್ ಅವರೊಂದಿಗೆ ಸ್ಕೂಟರ್ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮುಂಭಾಗದಲ್ಲಿ ಸಾಗುತ್ತಿದ್ದ ಕಾರನ್ನು ಹಿಂದಿಕ್ಕಲು ಯತ್ನಿಸುವಾಗ ಸ್ಕೂಟರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.
ಈ ವೇಳೆ ರಾಹುಲ್ ಎದುರಿನಿಂದ ಬರುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ಗಂಭೀರವಾಗಿ ಗಾಯಗೊಂಡರು. ಅವರನ್ನು ತಕ್ಷಣ ಕೋಲಂಚೇರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ತಂದೆ ಸುನೀಪ್ (ಕೆಎಸ್ಆರ್ಟಿಸಿ ಉದ್ಯೋಗಿ), ತಾಯಿ ಸಿನಿ, ಮತ್ತು ಸಹೋದರಿ ಕ್ಷೇತ್ರ ಇವರನ್ನು ಅಗಲಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ಜೂಲಿಯನ್ ಜೋಸೆಫ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಕುರಿತು ತನಿಖೆ ಮುಂದುವರಿಸಿದ್ದಾರೆ.

0 Comments