ಪೆರ್ಲ : "ದೇಶದ ಜನಸಂಖ್ಯೆ ಕೇವಲ ಅಂಕಿ-ಅಂಶವಲ್ಲ, ಅದು ಬಲಿಷ್ಠ ಮಾನವ ಸಂಪನ್ಮೂಲವಾಗಿದ್ದು, ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಸುಸ್ಥಿರ ಹಾಗೂ ಪ್ರಗತಿಪರ ಭಾರತ ನಿರ್ಮಾಣ ಸಾಧ್ಯ" ಎಂದು ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕಾವ್ಯಶ್ರೀ ಪಿ. ಅಭಿಪ್ರಾಯಪಟ್ಟರು.
ಪೆರ್ಲದ ನಾಲಂದಾ ಕಲೆ ಮತ್ತು ವಿಜ್ಞಾನ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
"ಸುಸ್ಥಿರ ಅಭಿವೃದ್ಧಿಯ ಬೆಳವಣಿಗೆಯಲ್ಲಿ ಯುವ ಜನತೆಯ ಪಾತ್ರ: ಸವಾಲುಗಳು ಮತ್ತು ಅವಕಾಶಗಳು" ಎಂಬ ವಿಷಯದ ಕುರಿತು ದಿಕ್ಸೂಚಿ ಭಾಷಣ ನೀಡಿದ ಅವರು, ಯುವ ಸಮುದಾಯವು ಶಿಕ್ಷಣ, ಕೌಶಲ್ಯ ಹಾಗೂ ಜವಾಬ್ದಾರಿಯುತ ಚಿಂತನೆಯ ಮೂಲಕ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು.
ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುವ ಕಾವ್ಯಶ್ರೀ ಪಿ. ಅವರು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳಿಗೆ ಉನ್ನತ ಸಾಧನೆ ಮಾಡುವಂತೆ ಪ್ರೇರಣೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲ ಶಂಕರ ಕೆ. ಮಾತನಾಡಿ, ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಯ ಮೂಲಕ ಇಂದಿನ ಯುವ ಪೀಳಿಗೆ ದೇಶದ ಆರ್ಥಿಕ ಬೆಳವಣಿಗೆಯ ಶಕ್ತಿಯಾಗಿ ರೂಪುಗೊಳ್ಳಬೇಕು ಎಂದು ಹೇಳಿದರು. ಇದೇ ವೇಳೆ ಕಾಲೇಜಿನ ಹಳೆ ವಿದ್ಯಾರ್ಥಿನಿಯೊಬ್ಬರು ಮುಖ್ಯ ಅತಿಥಿಯಾಗಿ ಭಾಗವಹಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ಎನ್ಎಸ್ಎಸ್ ಯೋಜನಾಧಿಕಾರಿ ವರ್ಷಿತ್, ಕಾಲೇಜಿನ ಸಿಬ್ಬಂದಿ ಕಾರ್ಯದರ್ಶಿ ಶಿಲ್ಪಾ ಉಪಸ್ಥಿತರಿದ್ದು ಶುಭ ಹಾರೈಸಿದರು.
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಅನುಪಮಾ ಟಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಆಶಾಲತಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು ಹಾಗೂ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

0 Comments