ಕೊಚ್ಚಿ: ದಕ್ಷಿಣ ಕನ್ನಡ ಜಿಲ್ಲೆಯ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಕೊಡಗು ಮೂಲದ ಅಬ್ದುಲ್ ನಾಸರ್ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೊಚ್ಚಿಯಲ್ಲಿ ಬಂಧಿಸಿದೆ.
ಕಳೆದ ಮೂರು ವರ್ಷಗಳಿಂದ ಅಬ್ದುಲ್ ನಾಸರ್ ಕೊಚ್ಚಿಯ ಪಳ್ಳುರತ್ತಿ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದನು. ಬೆಂಗಳೂರು ಹಾಗೂ ಕೊಚ್ಚಿಯ ಎನ್ಐಎ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿಯ ಕುರಿತು ಮಾಹಿತಿ ನೀಡುವವರಿಗೆ ಎನ್ಐಎ ₹2 ಲಕ್ಷ ಬಹುಮಾನ ಘೋಷಿಸಿತ್ತು.
2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ಬೆಳ್ಳಾರೆಯಲ್ಲಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು (26) ಅವರನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದರು. ಕೋಳಿ ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ವೇಳೆ ಈ ಕೃತ್ಯ ನಡೆದಿತ್ತು.
ಈ ಪ್ರಕರಣದಲ್ಲಿ ಈಗಾಗಲೇ 19 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ನಡೆಸಿದ ಎನ್ಐಎ, ತನ್ನ ಆರೋಪಪಟ್ಟಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಪಾತ್ರವಿರುವುದಾಗಿ ಉಲ್ಲೇಖಿಸಿದೆ. ಒಂದು ಸಮುದಾಯದಲ್ಲಿ ಭಯದ ವಾತಾವರಣ ನಿರ್ಮಿಸಿ, ಸಮಾಜದಲ್ಲಿ ಕೋಮು ವೈಷಮ್ಯ ಮತ್ತು ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಈ ಹತ್ಯೆ ನಡೆಸಲಾಗಿದೆ ಎಂದು ಎನ್ಐಎ ಆರೋಪಪಟ್ಟಿಯಲ್ಲಿ ತಿಳಿಸಿದೆ.
ಆರಂಭದಲ್ಲಿ ರಾಜ್ಯ ಪೊಲೀಸ್ ತನಿಖೆ ನಡೆಸಿದ್ದ ಈ ಪ್ರಕರಣವನ್ನು ಬಳಿಕ ಎನ್ಐಎ ತನ್ನ ವಶಕ್ಕೆ ಪಡೆದು ತನಿಖೆ ಮುಂದುವರಿಸಿತ್ತು.

0 Comments