ಕಾಸರಗೋಡು : ದೇಶದ 80 ನೇ ಸ್ವಾತಂತ್ರ್ಯ ದಿನವನ್ನು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಬಿಜೆಪಿ ಮತ್ತು ಮಹಿಳಾಮೋರ್ಚಾ ಸೇರಿದಂತೆ ಪೋಷಕ ಸಂಘಟನೆಗಳು ವಿಜೃಂಭಣೆಯಿಂದ ಆಚರಿಸಿದವು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕರೆಗೆ ಓಗೊಟ್ಟು ಬೂತ್ಗಳಲ್ಲಿ, ಮನೆಗಳಲ್ಲಿ, ಸಂಸ್ಥೆಗಳಲ್ಲಿ ಹಾಗೂ ಬಿಜೆಪಿ ಕಚೇರಿಗಳಲ್ಲಿ ಬಿಜೆಪಿ ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಹಾರಿಸಿ ಸಂಪೂರ್ಣ ವಂದೇ ಮಾತರಂ ಗೀತೆಯನ್ನು ಹಾಡಿದರು. ಜಿಲ್ಲಾ ಕಚೇರಿಯಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್. ರಾಷ್ಟ್ರಧ್ವಜವನ್ನು ಹಾರಿಸಿದರು. ನಂತರ ಸ್ವಾತಂತ್ರ್ಯ ದಿನದ ಸಂದೇಶವನ್ನು ನೀಡಿದರು.
ಕಾಸರಗೋಡು ಹೊಸ ಬಸ್ ನಿಲ್ದಾಣದ ಪರಿಸರದಲ್ಲಿ ಸಂಪೂರ್ಣ ವಂದೇ ಮಾತರಂ ಗಾಯನ ಕಾರ್ಯಕ್ರಮ ನಡೆಯಿತು. ರಾಜ್ಯದ 15,000 ಕೇಂದ್ರಗಳಲ್ಲಿ ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದ ಭಾಗವಾಗಿ ಕಾಸರಗೋಡಿನಲ್ಲೂ ಈ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ. ರಂಜಿತ್ ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು. ಬಿಜೆಪಿ ಜಿಲ್ಲಾ, ಮಂಡಲ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಂದೇ ಮಾತರಂ ಗೀತೆಯನ್ನು ಹಾಡಿದರು.

0 Comments