ಕಾಸರಗೋಡು : ಯುವತಿಯೋರ್ವೆ ಬಾತ್ ರೂಮೊಳಗೆ ಸ್ನಾನಗೈಯುತ್ತಿದ್ದ ದೃಶ್ಯಗಳನ್ನು ಚಿತ್ರೀಕರಿಸಲು ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ನಾಯಕನೋರ್ವನ ವಿರುದ್ಧ ಶ್ರೀಕಂಠಪುರಮ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೈಸಕ್ಕರಿ ದೇವಮಾತಾ ಕಾಲೇಜಿನ ಎಸ್ಎಫ್ಐ ನಾಯಕ ಹಾಗೂ ವಿಶ್ವವಿದ್ಯಾಲಯ ಯೂನಿಯನ್ ಕೌನ್ಸಿಲರ್ ಕೆ.ನವನೀತ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಣ್ಣೂರು ಶ್ರೀಕಂಠಪುರಂ ನಿವಾಸಿಯಾದ ಯುವತಿಯೋರ್ವೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ದೃಶ್ಯಗಳನ್ನು ಚಿತ್ರೀಕರಿಸಲು ಯತ್ನಿಸುತ್ತಿದ್ದ ವೇಳೆ ಸ್ಥಳೀಯರು ಆರೋಪಿಯನ್ನು ಸ್ಥಳದಲ್ಲೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಪೊಲೀಸರು ಬಂಧನ ದಾಖಲಿಸಿಕೊಂಡು ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಆರೋಪಿಯ ವಿರುದ್ಧ ಸಣ್ಣ ಪ್ರಮಾಣದ ಆರೋಪಗಳಡಿ ಮಾತ್ರ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಯುವತಿಯ ಸಂಬಂಧಿಕರು ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ಆರೋಪಿಯ ಮೊಬೈಲ್ ಫೋನ್ ಪರಿಶೀಲಿಸಿದರೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಬಹುದು ಎಂದು ಅವರು ತಿಳಿಸಿದ್ದಾರೆ.
ಆರೋಪಿಯ ಮೊಬೈಲ್ನಲ್ಲಿ ಹಲವು ಮಹಿಳೆಯರ ಅಶ್ಲೀಲ ದೃಶ್ಯಗಳು ಹಾಗೂ ಮಾರ್ಫ್ ಮಾಡಲಾದ ಚಿತ್ರಗಳನ್ನು ಸಂಗ್ರಹಿಸಿಟ್ಟಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ಪ್ರಕರಣವನ್ನು ರಾಜಿ ಮಾಡಿಸಲು ಪಕ್ಷದ ನಾಯಕತ್ವದ ಕೆಲವರು ಮಧ್ಯಪ್ರವೇಶಿಸಲು ಪ್ರಯತ್ನಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

0 Comments