ಬದಿಯಡ್ಕ: ಇಲ್ಲಿನ ಶ್ರೀ ಶಂಕರನಾರಾಯಣ ಪಂಚಾಯತ್ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ವಾರ್ಡ್ ಸದಸ್ಯ ಹಾಗೂ ಬದಿಯಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹಮೀದ್ ಕೆಡೆಂಜಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾವಿರಾರು ಹೋರಾಟಗಾರರ ಬಲಿದಾನದಿಂದ ದೇಶಕ್ಕೆ ಲಭಿಸಿದ ಸ್ವಾತಂತ್ರ್ಯದ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಜಗತ್ತಿನಲ್ಲಿ ಭಾರತ ಅಪೂರ್ವ ರಾಷ್ಟ್ರವಾಗಿದ್ದು, ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿ ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಬೇಕು ಎಂದು ಹೇಳಿದರು.
ಶಾಲಾ ಮುಖ್ಯಶಿಕ್ಷಕ ಶ್ರೀಧರ ಭಟ್ ಸ್ವಾಗತಿಸಿ, ಸ್ವಾತಂತ್ರ್ಯ ಹೋರಾಟದ ಕುರಿತು ವಿವರಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಭವ್ಯಶ್ರೀ, ಶಾಲಾ ಅಭಿವೃದ್ಧಿ ಸಮಿತಿಯ ಕೃಷ್ಣಪ್ರಸಾದ್ ಹಾಗೂ ಆಶಾ ಕಾರ್ಯಕರ್ತೆ ಚಂದ್ರಾವತಿ ಶುಭಾಶಯ ಕೋರಿದರು. ಶಿಕ್ಷಕ ಶಿವರಾಮ್ ಸ್ವಾತಂತ್ರ್ಯದ ಮಹತ್ವವನ್ನು ವಿವರಿಸಿದರು.
ಶಿಕ್ಷಕಿ ಪವಿತ್ರ ಅವರ ನೇತೃತ್ವದಲ್ಲಿ ದೇಶಭಕ್ತಿ ಗೀತೆ, ನೃತ್ಯ ಹಾಗೂ ಭಾಷಣ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಶಿಕ್ಷಕಿ ಗೀತಾ ಮಾಲಿನಿ ವಂದಿಸಿದರು. ಭಗತ್ ಸಿಂಗ್ ಕ್ಲಬ್ ಹಾಗೂ ವೃಂದಾವನ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.

0 Comments