ತಿರುವನಂತಪುರ : ಕನ್ಯಾಕುಮಾರಿಯ ಖಾಸಗಿ ನರ್ಸಿಂಗ್ ಕಾಲೇಜಿನ ಕಟ್ಟಡದಿಂದ ಜಿಗಿದು ಮಲಯಾಳಿ ವಿದ್ಯಾರ್ಥಿನಿ ಮೃತಪಟ್ಟ ಪ್ರಕರಣದಲ್ಲಿ ಕಾಲೇಜಿನ ಪ್ರಾಂಶುಪಾಲೆ ಶೀಜಾ ಅವರನ್ನು ಬಂಧಿಸಲಾಗಿದೆ. ನೆಯ್ಯಾಟಿಂಕರ ನಿವಾಸಿಯಾದ ವಿದ್ಯಾರ್ಥಿನಿ ಆನ್ಸಿಜಾ ಅವರ ಸಾವಿನ ಪ್ರಕರಣದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಶೀಜಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ದಾಖಲಿಸಲಾಗಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಶೀಜಾ ಅವರನ್ನು ವಿಶೇಷ ತನಿಖಾ ತಂಡವು ಬೆಂಗಳೂರಿನ ಸಮೀಪದ ಹೊಸೂರಿನಲ್ಲಿ ಪತ್ತೆಹಚ್ಚಿ ಬಂಧಿಸಿದೆ. ಕಾಲೇಜಿನ ಮೂರನೇ ಮಹಡಿಯಿಂದ ಕೆಳಗೆ ಜಿಗಿದ ಆನ್ಸಿಜಾ ಅವರನ್ನು ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಮೃತಪಟ್ಟಿದ್ದರು.
ಪ್ರಾಂಶುಪಾಲೆಯ ಮಾನಸಿಕ ಕಿರುಕುಳದಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿಬಂದಿತ್ತು. ವಿದ್ಯಾರ್ಥಿಗಳು ಹಾಗೂ ಕುಟುಂಬಸ್ಥರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕನ್ಯಾಕುಮಾರಿ ಎಸ್ಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.
ಕಾಲೇಜಿಗೆ ಮೊಬೈಲ್ ಫೋನ್ ತಂದಿದ್ದಕ್ಕಾಗಿ ಶಿಕ್ಷಕಿ ತನ್ನನ್ನು ಮಾನಸಿಕವಾಗಿ ಕಿರುಕುಳ ನೀಡಿದ್ದರು ಎಂದು ಆನ್ಸಿಜಾ ತನ್ನ ಸ್ನೇಹಿತರಿಗೆ ಕಳುಹಿಸಿದ್ದ ವಾಯ್ಸ್ ಮೆಸೇಜ್ ಕೂಡ ಈ ಹಿಂದೆ ಬಹಿರಂಗವಾಗಿತ್ತು. ಪ್ರಕರಣದ ಕುರಿತು ವಿಶೇಷ ತನಿಖಾ ತಂಡ ಹೆಚ್ಚಿನ ತನಿಖೆ ಮುಂದುವರಿಸಿದೆ.

0 Comments